ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಆರೋಗ್ಯ ಇಲಾಖೆ ಅನುಮತಿ ನೀಡಿದೆ.
ಈ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಯಡಿಯೂರಪ್ಪ ಮಹತ್ವದ ಸಭೆ ಕರೆದಿದ್ದು, ಜನವರಿ 1ರಿಂದ ಶಾಲೆ ಆರಂಭಿಸಲು ದಿನಾಂಕ ನಿಗದಿಗೊಳಿಸುವ ಸಾಧ್ಯತೆಯಿದೆ.
ತಾಂತ್ರಿಕ ಶಿಕ್ಷಣ ಸಮಿತಿ ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದ ಬೆನ್ನಲ್ಲೇ, ರಾಜ್ಯ ಆರೋಗ್ಯ ಇಲಾಖೆ ಕೂಡ ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ಗ್ರೀನ್ ಸಿಗ್ನಲ್ ನೀಡಿ, ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಮತ್ತು ಪಿಯು ಕಾಲೇಜುಗಳನ್ನು ಪ್ರಾರಂಭಿಸುವ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯದಲ್ಲಿ ಪ್ರಸ್ತುತ ಕೋವಿಡ್-19ರ ಪರಿಸ್ಥಿತಿಯನ್ನು ಪರಿಗಣಿಸಿ ಜನವರಿ 1ರಿಂದ ಶಾಲೆ ಮತ್ತು ಪಿಯು ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.