


ಮುಂಬರುವ ಜುಲೈ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಈ ಅವಧಿಯಲ್ಲಿ ಎಂಟು ಹೊಸ ಮಸೂದೆಗಳ ಮಂಡನೆ ಮತ್ತು ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.ಜುಲೈ 21 ರಿಂದ ಆಗಸ್ಟ್ 21 ರವರೆಗೆ ಅಧಿವೇಶನ ನಡೆಯಲಿದ್ದು, ಆಗಸ್ಟ್ 12 ರಿಂದ 18 ರವರೆಗೆ ವಿರಾಮವಿರುತ್ತದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ ಕೂಡ ಚರ್ಚೆಯ ಒಂದು ಪ್ರಮುಖ ಅಂಶವಾಗಿರಲಿದೆ ಎಂದು ಹೇಳಲಾಗಿದೆ.ಚುನಾವಣೆಗೆ ತಿಂಗಳುಗಳ ಮೊದಲು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ನಿರ್ಧಾರವನ್ನು ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು ,ಇದಕ್ಕೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗ, ವಿಶೇಷ ತೀವ್ರ ಪರಿಷ್ಕರಣೆಯು ನ್ಯಾಯಯುತ ಮತ್ತು ಪಾರದರ್ಶಕ ಮತದಾನವನ್ನು ಖಚಿತಪಡಿಸುತ್ತದೆ ಎಂದಿದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಕಾರ್ಯಸೂಚಿಯಲ್ಲಿ ಎಂಟು ಹೊಸ ಮಸೂದೆಗಳು ಅಷ್ಟೆ ಅಲ್ಲದೆ, ಸರ್ಕಾರವು ಹೊಸ ಆದಾಯ ತೆರಿಗೆ ಮಸೂದೆಯನ್ನು ಸಹ ಅಂಗೀಕರಿಸಲು ಗಮನಹರಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಕಳೆದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಿದ ಬಳಿಕ ಪರಿಶೀಲನೆಗಾಗಿ ಜಂಟಿ ಸಮಿತಿಗೆ ಕಳುಹಿಸಲಾಗಿತ್ತು. 1961ರ ಆದಾಯ ತೆರಿಗೆ ಕಾಯ್ದೆಯಲ್ಲಿರುವ ಪದಗಳನ್ನು ತೆಗೆದುಹಾಕಿ ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವಂತೆ ಮಾಡುತ್ತದೆ ಎಂದು ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದರು.
ಪ್ರಸ್ತುತ ಅಧಿವೇಶನದಲ್ಲಿ ಈ ಖಾಯ್ದೆ ಅಂಗೀಕಾರವಾದರೆ, 2026 ಏಪ್ರಿಲ್ 1, ರಿಂದ ಜಾರಿಗೆ ಬರುತ್ತದೆ.ಇದೇ ಸಂದಭರ್ದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.








