


ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಸೋಮವಾರ(ಆ.17) ಪಕ್ಷವನ್ನು ತೊರೆದಿದ್ದಾರೆ. ಆರ್ಥಿಕ ಪರಿಸ್ಥಿತಿ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಟಿವಿ ಚರ್ಚೆಗಳಲ್ಲಿ ಆಡಳಿತ ಪಕ್ಷದ ಅತ್ಯಂತ ಗೋಚರ ಮುಖಗಳಲ್ಲಿ ಪೂನಾವಾಲಾ ಒಬ್ಬರಾಗಿದ್ದರು. ಜುಲೈ 30 ರಂದು ಮೊದಲು ರಾಜೀನಾಮೆ ಪತ್ರವನ್ನು ಕಳುಹಿಸಿದ್ದೆ. ಆದರೆ, ಬಿಜೆಪಿ ಅದನ್ನು ಸ್ವೀಕರಿಸಲಿಲ್ಲ. ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷ ಸಲಹೆ ನೀಡಿತ್ತು. ದೀರ್ಘ ಮತ್ತು ಕಠಿಣ ಚಿಂತನೆಯ ನಂತರ ಈ ನಿರ್ಧಾರ ಕೈಗೊಂಡಿದ್ದೇನೆ. ರಾಷ್ಟ್ರೀಯ ವಕ್ತಾರ ಮತ್ತು ಬಿಜೆಪಿಯ ಸಕ್ರಿಯ ಪ್ರಾಥಮಿಕ ಸದಸ್ಯತ್ವದಿಂದ ನನ್ನನ್ನು ಬಿಡುಗಡೆ ಮಾಡುವಂತೆ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕಳುಹಿಸಿದ ರಾಜೀನಾಮೆ ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ನಿತಿನ್ ನಬಿನ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರಂತಹ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಪ್ರೀತಿ, ವಾತ್ಸಲ್ಯ ಮತ್ತು ಅತ್ಯುನ್ನತ ಗೌರವದ ಭಾವನೆಯೊಂದಿಗೆ ಕಳೆದ ಐದು ವರ್ಷಗಳಲ್ಲಿ ನನಗೆ ನೀಡಿದ ವೇದಿಕೆ ಮತ್ತು ಅವಕಾಶಗಳಿಗಾಗಿ ನಾನು ಪಕ್ಷಕ್ಕೆ ಆಭಾರಿಯಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ವರದಿ ಮೂಲಕ ತಿಳಿದುಬಂದಿದೆ.








