ಬೆಂಗಳೂರು(ನ. 2): ಶಿರಾ ಮತ್ತು ಆರ್ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇವಲ ಒಂದು ದಿನ ಬಾಕಿ ಉಳಿದಿದೆ. ನಾಳೆ ಮತದಾನ ಇರುವುದರಿಂದ ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಎರಡೂ ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಇಂದು ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.
ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮುನಿರತ್ನ ಅವರಿಂದ ತೆರವಾಗಿರುವ ಆರ್ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ನ. 3ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಆಯಾ ಪಕ್ಷದ ನಾಯಕರು ಕಾರ್ಯಕರ್ತರ ಮೂಲಕ ಅಂತಿಮ ಹಂತದ ಪ್ರಯತ್ನ ನಡೆಸುತ್ತಿದ್ದಾರೆ.
ಆರ್.ಆರ್ ನಗರದಲ್ಲೂ ಇಂದು ಅಭ್ಯರ್ಥಿಗಳಿಂದ ಕೊನೆಯ ಕ್ಷಣದ ಹೋರಾಟ ನಡೆಯಲಿದೆ. ಇಂದು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಜ್ಞಾನಭಾರತಿ ವಾರ್ಡ್ ಹಾಗೂ ಲಗ್ಗೆರೆ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಲಿದ್ದಾರೆ. ಬೆಳಗ್ಗೆ 9 ಗಂಟೆಯಿಂದಲೇ ಕೃಷ್ಣಮೂರ್ತಿ ಮತಯಾಚನೆ ಆರಂಭಿಸಲಿದ್ದಾರೆ. ಆರ್ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೂಡ ಇಂದು ಮನೆ ಮನೆಗೆ ತೆರಳಿ ಮತ ಯಾಚಿಸಲಿದ್ದಾರೆ. ಬೆಳಗ್ಗೆ 10 ಗಂಟೆಯ ನಂತರ ಅವರು ಮನೆ ಮನೆಗೆ ತೆರಳಿ ಮತ ಕೇಳಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಕೂಡ ಇಂದು ಮನೆಗಳಿಗೆ ತೆರಳಿ ತಮಗೆ ಮತ ಹಾಕುವಂತೆ ಮನವಿ ಮಾಡಲಿದ್ದಾರೆ.
ಇಂದು ಶಿರಾದಲ್ಲಿ ಮೂರು ಪಕ್ಷದ ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರ ನಡೆಯಲಿದೆ. ಶಿರಾದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ, ಬಿಜೆಪಿಯ ರಾಜೇಶ್ ಗೌಡ ಹಾಗೂ ಜೆಡಿಎಸ್ ನ ಅಮ್ಮಾಜಮ್ಮ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ. ಪಕ್ಷದ ನಾಯಕರು ಸೆಲೆಬ್ರಿಟಿಗಳಿಂದ ಪ್ರಚಾರ ಅಂತ್ಯಗೊಂಡಿದ್ದು. ಇಂದು ತಮ್ಮ ಪರವಾಗಿ ತಾವೇ ಮತದಾರರ ಮುಂದೆ ಹೀಗಿ ಮತ ಕೇಳಲಿದ್ದಾರೆ. ಬೆಳಿಗ್ಗೆ 9 ಗಂಟೆಯಿಂದಲೇ ಅಭ್ಯರ್ಥಿಗಳು ಆಯ್ದ ಭಾಗಗಳಲ್ಲಿ ಮನೆ ಮನೆ ಪ್ರಚಾರ ಕೈಗೊಳ್ಳಲಿದ್ದಾರೆ.