




ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಜುಲೈ 16 ರಂದು ಗುಡ್ಡ ಕುಸಿತದಿಂದಾಗಿ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದ ಕೇರಳದ ಕಣ್ಣೂರಿನ ಚಾಲಕ ಅರ್ಜುನ್ ಅವರ ಸಹೋದರಿ ಅಂಜು, ಲಾರಿ ಮಾಲೀಕ ಮನಾಫ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಾಗಿದೆ.
ಮನಾಫ್ ತನ್ನ ಮೃತ ಸಹೋದರನ ಫೋಟೋ ಬಳಸಿಕೊಂಡು ಪ್ರಚಾರ ಪಡೆಯುತ್ತಿದ್ದು, ಯೂಟ್ಯೂಬ್ ಚಾನೆಲ್ ಆರಂಭಿಸಿ ಅಪಪ್ರಚಾರ ಮಾಡಿ ಕುಟುಂಬಕ್ಕೆ ಮಾನಹಾನಿ ಮಾಡಿದ್ದಾರೆ ಎಂದು ಅಂಜು ದೂರಿನಲ್ಲಿ ಆರೋಪಿಸಿದ್ದಾರೆ.
ಯೂಟ್ಯೂಬ್ ಚಾನೆಲ್ (YouTube) ಪ್ರಾರಂಭಿಸಿರುವ ಮುನಾಫ್ ಕುಟುಂಬದ ಹೆಸರಿಗೆ ಕಳಂಕ ತರುತ್ತಿದ್ದಾರೆ ಎಂದು ಅರ್ಜುನ್ ಸಹೋದರಿ ಅಂಜು ದೂರಿನಲ್ಲಿ ಆರೋಪಿಸಿದ್ದಾರೆ. ಇದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ ಬಗ್ಗೆ ಮಾನಹಾನಿ ಪ್ರಚಾರ ಮಡುತ್ತಿರುವವರ ವಿರುದ್ದವೂ ಕೇರಳ ರಾಜ್ಯದ ಚೆರುವಾಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ಸೈಬರ್ ದಾಳಿ ನಡೆಸಲು ಸಮುದಾಯದ ದ್ವೇಷವನ್ನು ಪ್ರಚೋದಿಸುವ ರೀತಿಯಲ್ಲಿ ಪರಿಸ್ಥಿತಿಯನ್ನು ಮನಾಫ್ ಸೃಷ್ಟಿಸಿದ್ದಾರೆ ಎಂದು ದೂರಿನಲ್ಲಿ ಅಂಜು ಆರೋಪಿಸಿದ್ದಾರೆ. ಇದು ಕುಟುಂಬಸ್ಥರಿಗೆ ನೋವುಂಟುಮಾಡಿದೆ ಎಂದು ಹೇಳಿಕೊಂಡಿದ್ದಾರೆ.
ಮನಾಫ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 (ಗಲಭೆಗೆ ಕುಮ್ಮಕ್ಕು) ಹಾಗೂ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (O) (ಸಾರ್ವಜನಿಕ ಶಾಂತಿ ಭಂಗ ಮತ್ತು ಅಶಾಂತಿ ಉಂಟುಮಾಡುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.