



ಶಿವಮೊಗ್ಗ: ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಬಾಣಂತಿ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಹೊಸನಗರ ತಾಲೂಕಿನ ಕೋಡೂರು ಬಳಿಯ ಶಾಖವಳ್ಳಿ ಗ್ರಾಮದ ಮಹೇಶ್ ಎಂಬುವರ ಪತ್ನಿ ಸುಮಾ (27) ಮೃತ ಬಾಣಂತಿ.
ಜೂ.28ರಂದು ಸುಮಾ ಜೆಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ವೈದ್ಯರು ಸುಮಾಗೆ ಜಾಂಡೀಸ್ ಇದೆ ಎಂದು ತಿಳಿಸಿದ್ದರು. ಬಳಿಕ ಹೊಟ್ಟೆ ನೋವಿನ ಹಿನ್ನೆಲೆ ಜು.1ರಂದು ಸುಮಾ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನದ ಬಳಿಕ ವೈದ್ಯರು ಸಹಜ ಹೆರಿಗೆ ಮಾಡಿಸಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ತಕ್ಷಣವೇ ಬಾಣಂತಿ ಸುಮಾ ಹಾಗೂ ಮಗುವನ್ನ ಕುಟುಂಬಸ್ಥರು ಮೆಗ್ಗಾನ್ ಶಿಫ್ಟ್ ಮಾಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ವೈದ್ಯರು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಿಸಿದ್ದರು.
ಸುಮಾ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮಗುವಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಕುಟುಂಬಸ್ಥರು ತೀರ್ಥಹಳ್ಳಿಯ ಜೆಸಿ ತಾಲೂಕು ಸರ್ಕಾರಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದು, ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಶಾಸಕ ಅರಗ ಜ್ಞಾನೇಂದ್ರ ಆಸ್ಪತ್ರೆಗೆ ಭೇಟಿ ನೀಡಿ, ಕ್ರಮದ ಜೊತೆಗೆ ಚಿಕಿತ್ಸಾ ವೆಚ್ಚ ನೀಡುವುದಾಗಿ ಭರವಸೆ ನೀಡಿದ್ದರು.








