


ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿ, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗೂ ಕಾನೂನಿನ ಮೂಲಕ ತಕ್ಕ ಶಿಕ್ಷೆಯಾಗುವಂತೆ ಕ್ರಮವಹಿಸಿ, ಆತನ ಸಾವಿಗೆ ನ್ಯಾಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಮಗನನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬವನ್ನು ಸಂತೈಸುವ ಉದ್ದೇಶದಿಂದ ಮೃತನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಷ್ಕೃತ್ಯ ಎಸಗಿದ ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳುವ ವಾಗ್ದಾನವನ್ನು ಕೂಡ ಆ ನೊಂದ ಕುಟುಂಬಕ್ಕೆ ಈ ವೇಳೆ ನೀಡುತ್ತಿದ್ದೇನೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ಶಾಂತಿ–ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ. ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುವ ಕೃತ್ಯದಲ್ಲಿ ತೊಡಗುವವರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ.








