ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ಪ್ರಕರಣದ ಬಳಿಕ ನಗರದಲ್ಲಿ ಉಂಟಾಗಿದ್ದ ಬಿಗುವಿನ ವಾತಾವರಣ ಶುಕ್ರವಾರ ಶಾಂತ ಸ್ಥಿತಿಗೆ ತಲುಪಿದ್ದರೂ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಮೇಲ್ನೋಟಕ್ಕೆ ಎಲ್ಲವೂ ನಿಯಂತ್ರಣಕ್ಕೆ ಬಂದಂತಿದ್ದರೂ, ನಗರದಾದ್ಯಂತ ಅಘೋಷಿತ ಕರ್ಫ್ಯೂ ಜಾರಿಯಾದಂತಿದೆ.
ನಗರದ ಪ್ರಮುಖ ಪ್ರದೇಶ ಮಾತ್ರವಲ್ಲ, ಗಲ್ಲಿ ಗಲ್ಲಿಯಲ್ಲಿರುವ ಅಂಗಡಿಗಳನ್ನೂ ಪೊಲೀಸರು ಮುಚ್ಚಿಸಿದ್ದಾರೆ. ಸೂಕ್ಷ್ಮ ಪ್ರದೇಶ ಎಂದು ಗುರುತಿಸಲ್ಪಟ್ಟಹಳೇ ಶಿವಮೊಗ್ಗದ ಬಹುತೇಕ ಭಾಗಗಳಲ್ಲಿ ಜನ ಮನೆಯಿಂದ ಹೊರಬರದಂತೆ ಪೊಲೀಸರು ನೋಡಿಕೊಳ್ಳುತ್ತಿದ್ದಾರೆ. ಉಳಿದ ಪ್ರದೇಶಗಳಲ್ಲಿ ಜನ ಸಂಚಾರ ವಿರಳವಾಗಿದ್ದು, ಸಂಪೂರ್ಣ ಬಂದ್ನಂತಹ ಸ್ಥಿತಿ ನಿರ್ಮಾಣವಾಗಿದೆ.
ನಗರಾದ್ಯಂತ ಶನಿವಾರ ಬೆಳಗ್ಗೆ 10ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ವಿಸ್ತರಿಸುವ ನಿರ್ಧಾರ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ಇದೇ ರೀತಿ ರಾತ್ರಿ ಕರ್ಫ್ಯೂಅನ್ನು ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮುಂದುವರೆಸಲಾಗಿದೆ.
ನಾಗೇಶ್ ಮೇಲೆ ಗುರುವಾರ ಬೆಳಗ್ಗೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಈ ವೇಳೆ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ವೇಳೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿ ಈಗಾಗಲೇ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೂರ್ವವಲಯ ಐಜಿ ಎಸ್.ರವಿ ಹೇಳಿದರು.
ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ನಾಗೇಶ್ ಅವರನ್ನು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಏತನ್ಮಧ್ಯೆ, ನಾಗೇಶ್ ಅವರಿಗೆ ಕೆಲ ದಿನಗಳ ಹಿಂದೆ ಜೀವಬೆದರಿಕೆ ಬರುತ್ತಿದ್ದ ವಿಚಾರ ಇದೀಗ ಬಹಿರಂಗವಾಗಿದೆ. ಈ ಕುರಿತು ಅವರು ತಮ್ಮ ಆತ್ಮೀಯರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.