


ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಶನಿವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ಇಡೀ ಪಟ್ಟಣವೇ ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ಏಕಾಏಕಿ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ನೀರಿನಿಂದ ಆವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಶನಿವಾರ ಸಂಜೆ ಆರಂಭವಾದ ಮಳೆ ರಾತ್ರಿಯಿಡೀ ನಿರಂತರವಾಗಿ ಸುರಿದ ಪರಿಣಾಮ ರಾಜೌರಿಯ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ ಪರಿಣಾಮ ಪಟ್ಟಣದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಬೆಲಾ ಕಾಲೋನಿ ಸಮೀಪ ದರ್ಹಾಲಿ ನದಿಯ ಪ್ರವಾಹ ತಡೆಗೋಡೆ ಒಡೆದು ಅಪಾರ ಪ್ರಮಾಣದ ನೀರು ಹೊಸ ಬಸ್ ನಿಲ್ದಾಣಕ್ಕೆ ನುಗ್ಗಿತು. ಈ ಪರಿಣಾಮ ಅಲ್ಲಿದ್ದ ಡಜನ್ಗಟ್ಟಲೆ ಕಾರುಗಳು, ಬೈಕ್ಗಳು ಹಾಗೂ ಇತರೆ ವಾಹನಗಳು ಪ್ರವಾಹದ ರಭಸಕ್ಕೆ ಕೊಚ್ಚಿಹೋಗಿದ್ದು, ಹಲವು ವಾಹನಗಳು ನೀರಿನಲ್ಲಿ ಸಂಪೂರ್ಣ ಮುಳುಗಿವೆ.
ಅಬ್ದುಲ್ಲಾ ಸೇತುವೆ ಸಮೀಪದ ಕೊಳಗೇರಿ ಪ್ರದೇಶಕ್ಕೂ ಪ್ರವಾಹದ ನೀರು ನುಗ್ಗಿದ ಪರಿಣಾಮ 50ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿವೆ. ಮನೆಗಳು, ರಸ್ತೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನರು ಅಗತ್ಯ ವಸ್ತುಗಳನ್ನು ಕೂಡ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.
ತಾರಿಕ್ ಸೇತುವೆ ಬಳಿಯ ಪ್ರದೇಶಗಳಿಗೂ ಪ್ರವಾಹದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗೆ ನಿರಂತರವಾಗಿ ತುರ್ತು ಕರೆಗಳು ಬಂದವು. ತಕ್ಷಣ ಕಾರ್ಯಾಚರಣೆ ಆರಂಭಿಸಿದ ತಂಡಗಳು ನದಿಯ ದಡದಲ್ಲಿದ್ದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮ ತಂಡಗಳು ಬಂದಿರುವ ಬಹುತೇಕ ಎಲ್ಲಾ ಎಸ್ಒಎಸ್ ಕರೆಗಳಿಗೆ ತಕ್ಷಣ ಸ್ಪಂದಿಸುತ್ತಿವೆ. ಈ ಹಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ. ಆಸ್ತಿಪಾಸ್ತಿಗೆ ಸಾಕಷ್ಟು ಹಾನಿಯಾಗಿದೆ. ಆದರೆ ಪ್ರವಾಹದ ನೀರು ಇಳಿದ ಬಳಿಕವೇ ನಷ್ಟದ ನಿಖರ ಪ್ರಮಾಣ ತಿಳಿಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹವಾಮಾನ ಇಲಾಖೆ ಜುಲೈ 23ರವರೆಗೆ ಜಮ್ಮು-ಕಾಶ್ಮೀರದಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಪೊಲೀಸರು ನದಿದಡ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಧ್ವನಿವರ್ಧಕಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದಾರೆ. ಅಪಾಯದ ಪ್ರದೇಶಗಳಿಂದ ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದೆ.
ಪ್ರಸ್ತುತ ರಾಜೌರಿ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿಗಳ ನೀರಿನ ಮಟ್ಟ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಅನಗತ್ಯವಾಗಿ ನದಿಗಳು, ಹೊಳೆಗಳು ಹಾಗೂ ತಗ್ಗು ಪ್ರದೇಶಗಳತ್ತ ತೆರಳದಂತೆ ಆಡಳಿತ ಎಚ್ಚರಿಕೆ ನೀಡಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.







