




ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಸಭಾ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಇಂದಿನ ನಿಗದಿತ ಕೇರಳ ಭೇಟಿಯನ್ನು ರದ್ದುಗೊಳಿಸಿದ್ದಾರೆ.
ಕೋಯಿಕ್ಕೋಡ್ ನಲ್ಲಿ ಪ್ರಮುಖ ಸಮಾವೇಶವೊಂದರಲ್ಲಿ ಪಾಲ್ಗೊಳ್ಳುವ ಮೂಲಕ ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಗಾಗಿ ತಮ್ಮ ಪಕ್ಷದ ಪರ ಪ್ರಚಾರಕ್ಕೆ ಚಾಲನೆ ನೀಡಬೇಕಿತ್ತು. ಆದರೆ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಬದಲಿಗೆ ಚುನಾವಣಾ ರಾಜ್ಯವಾದ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
ಸೋನಿಯಾ ಗಾಂಧಿಯವರನ್ನು ನಿನ್ನೆ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ವಹಿಸಿದ್ದಾರೆ ಎಂದು ವರದಿಯಾಗಿದೆ.
ಹವಾಮಾನ ಬದಲಾವಣೆಯಿಂದ ಸೋನಿಯಾ ಗಾಂಧಿ ಅಸ್ವಸ್ಥಗೊಂಡಿದ್ದು, ಅವರನ್ನು ವೈದ್ಯಕೀಯ ನಿಗಾವಣೆಯಡಿಯಲ್ಲಿ ಇಡಲಾಗಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.








