


ಪಾಟ್ನ: ಪೂಜಾ ಕೈಂಕರ್ಯಗಳು ಜರುಗುತ್ತಿದ್ದ ವೇಳೆ ಕಾಲ್ತುಳಿತ ಸಂಭವಿಸಿ, 7 ಮಂದಿ ಸಾವನ್ನಪ್ಪಿರುವ ಘಟನೆ ಇಂದು(ಆ.17) ಬೆಳಗ್ಗೆ ಬಿಹಾರದ ಲಖಿಸರಾಯ್ನಲ್ಲಿರುವ ಅಶೋಕ ಧಾಮ ದೇವಾಲಯದಲ್ಲಿ ನಡೆದಿದೆ.
ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಪವಿತ್ರ ಶ್ರಾವಣ ಮಾಸದ ಮೂರನೇ ಸೋಮವಾರವಾದ ಇಂದು ಶಿವನಿಗೆ ಪ್ರಾರ್ಥನೆ ಸಲ್ಲಿಸಲು ಹಾಗೂ ಜಲಾಭಿಷೇಕ (ಜಲ ಅರ್ಪಣೆ) ಮಾಡಲು ಹೆಚ್ಚಿನ ಸಂಖ್ಯೆ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎನ್ನುವಾಗಲೇ ಬೆಳ್ಳಂಬೆಳಗ್ಗೆ ದುರಂತ ಸಂಭವಿಸಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ, ರಕ್ಷಣಾ ಕಾರ್ಯಾಚರಣೆ ಹಾಗೂ ವೈದ್ಯಕೀಯ ನೆರವು ಒದಗಿಸಿದ್ದಾರೆ. ಅಧಿಕಾರಿಗಳು ದೇವಾಲಯದ ಆವರಣದಲ್ಲಿ ಜನಸಂದಣಿ ನಿಯಂತ್ರಿಸಲು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.








