


ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಶಿವಪ್ಪ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಶಿವಪ್ಪ, ಬಿಳಚೋಡು ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ ಕಂದಾಯ ವಸೂಲಿ ಮಾಡುವಂತೆ ಟಾರ್ಗೆಟ್ ನೀಡಿ ಉದ್ರಿ ಕಂದಾಯ ವಸೂಲಿ ಮಾಡುವಂತೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.
ಮೃತ ಶಿವಪ್ಪ ಪುತ್ರ ಅಶೋಕ್ ಬಿಳಚೋಡು ಪೊಲೀಸ್ ಠಾಣೆಯಲ್ಲಿ ಪಿಡಿಒ ನಂದಲಿಂಗೇಶ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಿಳಚೋಡು ಗ್ರಾಮ ಪಂಚಾಯತಿಯಲ್ಲಿ 23 ವರ್ಷ ನೀರಗಂಟಿಯಾಗಿದ್ದ ಶಿವಪ್ಪ ಕಳೆದ 2-3 ವರ್ಷಗಳಿಂದ ಬಿಲ್ ಕಲೆಕ್ಟರ್ ಆಗಿದ್ದರು. ಕಂಪ್ಯೂಟರ್ ಜ್ಞಾನ ಇಲ್ಲದ ಹಿನ್ನೆಲೆ ಪಿಡಿಒ ನಂದಲಿಂಗೇಶ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ಜಾತಿ ನಿಂದನೆ ಮಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇನ್ನು, ಬಿಲ್ ಕಲೆಕ್ಟರ್ ಕುಟುಂಬಸ್ಥರು ಪಿಡಿಒ ನಂದಲಿಂಗೇಶ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.








