

ಸುಳ್ಯ: ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕಳಗಿರವರ ಹತ್ಯೆ ಪ್ರಕರಣದ A2 ಆರೋಪಿ ಹರಿಪ್ರಸಾದ್ ಗೆ ಕರ್ನಾಟಕ ಹೈಕೋರ್ಟ್ನಿಂದ ಜಾಮೀನು ಮಂಜೂರಾಗಿದೆ.
ಈ ಪ್ರಕರಣದ ಪ್ರಮುಖ ಎ2 ಆರೋಪಿ ಹರಿಪ್ರಸಾದ್ ಎಂಬಾತ ಜೀವಾವಧಿ ಶಿಕ್ಷೆಯಲ್ಲಿ ಜೈಲುವಾಸ ಅನುಭವಿಸುತ್ತಿದ್ದ. ಇದೀಗ ಈತನಿಗೆ ಆರೋಪಿಗೆ ಜಾಮೀನು ಮಂಜೂರಾಗಿದೆ.
ಹೈಕೋರ್ಟ್ ವಕೀಲರಾದ ಲತೀಫ್ ಆರೋಪಿಯ ಪರ ವಾದ ಮಾಡಿದರು.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಸಂಪಾಜೆ ಗ್ರಾ.ಪಂ ಮಾಜಿ ಅಧ್ಯಕ್ಷರಾಗಿದ್ದ ಬಾಲಚಂದ್ರ ಕಳಗಿ ಮಾರ್ಚ್ 19, 2019 ರಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಮೇಕೇರಿ-ತಾಳತ್ಮನೆ ರಸ್ತೆಯಲ್ಲಿ ಲಾರಿಯಿಂದ ಡಿಕ್ಕಿ ಹೊಡೆಸಿ ಹತ್ಯೆ ಮಾಡಲಾಗಿತ್ತು.ಮೇಲ್ನೋಟಕ್ಕೆ ಅಪಘಾತ ಪ್ರಕರಣದಂತೆ ಕಂಡು ಬಂದಿದ್ದರೂ ತನಿಖೆ ನಡೆಸಿದ ನಂತರ ಪೊಲೀಸರು ಈ ವ್ಯವಸ್ಥಿತ ಕೊಲೆ ಪ್ರಕರಣವನ್ನು ಬೇಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಾಜೆ ಕಲ್ಲುಗುಂಡಿ ನಿವಾಸಿಗಳಾದ ಸಂಪತ್ ಕುಮಾರ್, ಹರಿಪ್ರಸಾದ್ ಮತ್ತು ಲಾರಿ ಚಾಲಕ ಮಡಿಕೇರಿಯ ಜಯನ್ ಎಂಬವರನ್ನು ಮಡಿಕೇರಿ ಪೋಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ಒಟ್ಟು ಮೂರು ಆರೋಪಿಗಳು ಜೈಲುವಾಸ ಅನುಭವಿಸುತ್ತಿದ್ದು, ಜಾಮೀನಿನಲ್ಲಿ ಹೊರಗೆ ಬಂದಿದ್ದ ಈ ಪ್ರಕರಣದ ಪ್ರಮುಖ ಎ1 ಆರೋಪಿ ಸಂಪತ್ ಎಂಬಾತನನ್ನು ಸುಳ್ಯದ ಶಾಂತಿನಗರದಲ್ಲಿ ಗುಂಡು ಹೊಡೆದು ಹತ್ಯೆ ಮಾಡಿದ್ದರು. ಆರೋಪಿಗಳಾದ ಹರಿಪ್ರಸಾದ್ ಹಾಗೂ ಜಯನ್ ಎಂಬವರು ಮಡಿಕೇರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 16 ರಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರಶಾಂತಿ ಜಿ. ವಿಚಾರಣೆ ನಡೆಸಿ, ತೀರ್ಪನ್ನು ಅಕ್ಟೋಬರ್ -19ಕ್ಕೆ ಕಾಯ್ದಿರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ವಿರುದ್ಧ ಸೆಕ್ಷನ್ 120B, 302, 201 R/w sec 34 ಐಪಿಸಿ ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿತ್ತು.