ಮೊದಲನೇ ಆರೋಪಿಯಾಗಿ ಮುನೀರ್ ಕಾಟಿಪಳ್ಳ , 101 ಮಂದಿಯ ವಿರುದ್ಧ ಚಾರ್ಜ್ ಶೀಟ್
ವರ್ಷಗಳ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುರತ್ಕಲ್ ಅಕ್ರಮ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಹೋರಾಟ ಮಾಡಿದ್ದ ಸಾವಿರಾರು ಹೋರಾಟಗಾರ ಪೈಕಿ 101 ಮಂದಿಯ ವಿರುದ್ಧ ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಹಲವು ಕಾಂಗ್ರೆಸ್ ಮಾಜಿ ಶಾಸಕರು, ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳು ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ ಈ ಹೋರಾಟಗಾರರ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವುದು ಹೋರಾಟಗಾರರಲ್ಲಿ ಅಚ್ಚರಿ ಮೂಡಿಸಿದೆ.
ಹೋರಾಟ ಸಮಿತಿಯ ಸಂಚಾಲಕ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರನ್ನು ಮೊದಲ ಆರೋಪಿಯನ್ನಾಗಿ ಉಲ್ಲೇಖಿಸಿದ್ದು, ಎರಡನೇ ಆರೋಪಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈ ಅವರನ್ನು ಉಲ್ಲೇಖಿಸಲಾಗಿದೆ. ಒಟ್ಟು 101 ಹೋರಾಟಗಾರರ ಹೆಸರು ಉಲ್ಲೇಖಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಹೋರಾಟಗಾರರ ಮೇಲೆ ಭಾರತೀಯ ದಂಡ ಸಂಹಿತೆ 143, 147, 341, 283 ಹಾಗೂ ಆರ್ಡಬ್ಲ್ಯೂ 149 ಸೆಕ್ಷನ್ ನಡಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.