ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಚೊಚ್ಚಲ ಸರಕಾರ




ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ ಶುರುವಾಗಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸುವೇಂದು ಅಧಿಕಾರಿ ಈಶ್ವರನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ್ದು, ಅವರೊಂದಿಗೆ ಇತರ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತನ್ಯ, ಕ್ಷುದಿರಂ ತಡು, ನಿಶಿತ್ ಪ್ರಾಮಾಣಿಕ್ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದರು. ರಾಜ್ಯಪಾಲ ಆರ್.ಎನ್ ರವಿ ಪ್ರಮಾಣ ವಚನ ಬೋಧಿಸಿದರು.
ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಹಾಗೂ ಎನ್ಡಿಎ ಆಡಳಿತದ 20 ರಾಜ್ಯಗಳ ಮುಖ್ಯಮಂತ್ರಿಗಳು ಸಾಕ್ಷಿಯಾಗಿದ್ದಾರೆ.
ಮೂಲತಃ ನಂದಿಗ್ರಾಮ ಚಳವಳಿಯ ಮೂಲಕ ಜನನಾಯಕರಾಗಿ ಹೊರಹೊಮ್ಮಿದ ಸುವೇಂದು ಅಧಿಕಾರಿ, ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿ ಅವರ ಬಲಗೈ ಬಂಟನಾಗಿದ್ದವರು. ನಂತರ ಬಿಜೆಪಿ ಸೇರಿ ಬಂಗಾಳದಾದ್ಯಂತ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು. ಇವರ ಸಂಘಟನಾ ಚಾತುರ್ಯವನ್ನು ಅಮಿತ್ ಶಾ ಅವರು ಮುಕ್ತಕಂಠದಿಂದ ಶ್ಲಾಘಿಸಿದ್ದರು.
`ಸೋಲಿಲ್ಲದ ಸರದಾರ’ ಎನಿಸಿಕೊಂಡಿದ್ದ ಮಮತಾ ಬ್ಯಾನರ್ಜಿ ಅವರಿಗೆ ಅವರದ್ದೇ ನೆಲದಲ್ಲಿ ಸೋಲುಣಿಸಿದ ಸುವೇಂದು ಅಧಿಕಾರಿ, ಈಗ ‘ಸೋನಾರ್ ಬಾಂಗ್ಲಾ’ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನ ಗಳಿಸಿ ಅಧಿಕಾರದ ಗದ್ದುಗೆ ಹಿಡಿದಿದ್ದು, ಕಾಂಗ್ರೆಸ್ (ಟಿಎಂಸಿ) 80 ಸ್ಥಾನಗಳನ್ನು ಗೆದ್ದಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.








