ಬಂಟ್ವಾಳ: ಬಂಟ್ವಾಳದಲ್ಲಿ ಕೊರೋನಾ ನಿಗ್ರಹದ ವೈದ್ಯಕೀಯ ಸೌಲಭ್ಯದಲ್ಲಿ ಯಾವುದೇ ಕೊರತೆಇಲ್ಲ, ಮುಂಜಾಗ್ರತೆಯ ದೃಷ್ಟಿಯಿಂದ ಬಂಟ್ವಾಳ ಹಾಗೂ ವಾಮದಪದವಿನಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣಕಾರ್ಯ ನಡೆಯುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಶುಕ್ರವಾರ ಕನ್ಯಾನ ಗ್ರಾಮ ಪಂಚಾಯತ್ನಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮದೊಳಗಿನ ಜಾಗೃತಿ ನಿರಂತರವಾಗಬೇಕು, ಆಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಿದೆ ಎಂದರು. ಕೋವಿಡ್ ಲಸಿಕೆಗೆ ಒಮ್ಮಿಂದೊಮ್ಮೆಲೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ತಾತ್ಕಾಲಿಕ ಕೊರತೆ ಉಂಟಾಗಿದ್ದು, ಹಂತಹಂತವಾಗಿ ಲಸಿಕೆ ನೀಡಿಕೆಯನ್ನು ಚುರುಕುಗೊಳಿಸಲಾಗುತ್ತದೆ
ಆರಂಭದಲ್ಲಿ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದವರಲ್ಲಿ, ಇದೀಗ ಜಾಗೃತಿ ಮೂಡಿದ್ದು ಆದ್ಯತೆ ನೆಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರ ಬದ್ಧವಾಗಿದೆ, ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಗ್ರಾಮಸ್ಥರಲ್ಲಿ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.
ತಹಶೀಲ್ದಾರ್ ರಶ್ಮಿ ಎಸ್. ಆರ್. ಮಾತನಾಡಿ, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿರುವ ದಾಖಲೆ ಇದ್ದವರಿಗೂ ರೇಷನ್ ಲಭ್ಯವಾಗಬೇಕು ಎನ್ನುವ ಕುರಿತಾಗಿ ಸರ್ಕಾರದ ಗಮನಕ್ಕೆ ತರಲಾಗಿದೆ, ಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದರು. ಲಸಿಕೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದೆ ಗ್ರಾಮಮಟ್ಟದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅವರು ಸಲಹೆ ನೀಡಿದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿ, ಪಂಚಾಯತ್ ಮಟ್ಟದಲ್ಲಿ ಕೋವಿಡ್ ನಿರ್ಮೂಲನೆಗೆ ಟಾಸ್ಕ್ ಫೋರ್ಸ್ ಸಮಿತಿ ಜವಬ್ದಾರಿಯಿಂದ ಕೆಲಸ ಮಾಡಬೇಕು, ಇದಕ್ಕೆ ಪೂರಕವಾಗಿ ಪಂಚಾಯತ್ ಅನುದಾನ ಬಳಸುವಂತೆ ಸೂಚನೆ ನೀಡಿದರು.
ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಮಾನ್, ಉಪಾಧ್ಯಕ್ಷ ಕುಸುಮಾ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪಿ.ಡಿ.ಒ.ವಿಜಯಶಂಕರ ಅಳ್ವ, ಕಂದಾಯ ನಿರೀಕ್ಷಕ ದಿವಾಕರ ಮುಗುಳ್ಯ , ಗ್ರಾಮಕರಣಿಕ ಪ್ರಶಾಂತ್, ವೈದ್ಯಾಧಿಕಾರಿ ಫಿಯೋಲಿನ್ ಡಿ.ಸೋಜ, ಶಾಸಕರ ವಾರ್ ರೂಂ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು, ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.