ಮೈಸೂರು: ದೇವಸ್ಥಾನಗಳ ಅಭಿವೃದ್ಧಿಗೆಂದು ರಾಜ್ಯದ 136 ದೇವಸ್ಥಾನಗಳಿಗೆ ತಲಾ ಒಂದು ಕೋಟಿಯಂತೆ 136 ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ದೇವರು ಕೊಟ್ಟಿದ್ದನ್ನು ದೇವಸ್ಥಾನಗಳ ಅಭಿವೃದ್ಧಿಗೆಂದು ನೀಡಲಾಗುವುದು. ನನ್ನ ಅಧಿಕಾರದಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಹಣದ ಕೊರತೆಯಾಗದಂತೆ ನಿಗಾವಹಿಸುವೆ ಎಂದು ಮೈಸೂರಿನ ಮುಡುಕುತೊರೆ ಗ್ರಾಮದ ಭ್ರಮರಾಂಬ ಸಮೇತ ಮಲ್ಲಿಕಾರ್ಜುನ ದೇವರ ಸಂಕೀರ್ಣದ ಪುನರ್ ನಿರ್ಮಾಣದ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹೇಳಿದ್ದಾರೆ.
ಶಿಥಿಲಗೊಂಡ ಮುಡುಕುತೊರೆ ದೇವಸ್ಥಾನಕ್ಕೆ 30ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು. ಈಗ 5ಕೋಟಿ ನೀಡಲಾಗಿದೆ. ಇನ್ನೊಂದು ವಾರದಲ್ಲಿ 10ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.
ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಾಮ್ ದಾಸ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.