ಮಡದಿ ಮೇಲೆ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪ್ರಶಾಂತ್ (32) ಎಂದು ಗುರುತಿಸಲಾಗಿದೆ.
ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗೌರಿಕೊಪ್ಪಲಿನ ಪ್ರಶಾಂತ್ 2 ವರ್ಷಗಳ ಹಿಂದೆ ಬಿಟ್ಟಗೊಂಡನಹಳ್ಳಿಯ ಬಿಂದು (24) ಜತೆ ವಿವಾಹವಾಗಿದ್ದ. ಈ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಬಿಂದು ತವರು ಮನೆ ಸೇರಿಕೊಂಡಿದ್ದಳು.ಇದರಿಂದ ಮಾನಸಿಕವಾಗಿ ನೊಂದಿದ್ದ ಪ್ರಶಾಂತ್ ಬಿಂದು ಮನೆಗೆ ಬಂದಿದ್ದ.
ಪತ್ನಿ ಮನೆಗೆ ಬಂದ ಪ್ರಶಾಂತ್ ಪತ್ನಿ ಬಿಂದು ಜತೆಗೆ ಗಲಾಟೆ ಮಾಡಿದ್ದಾನೆ. ಬಳಿಕ ಕುಡುಗೋಲಿನಿಂದ ಕೊಲೆ ಮಾಡಲು ಯತ್ನಿಸಿದ್ದಾನೆ. ತೀವ್ರ ಹಲ್ಲೆಗೊಳಗಾಗಿದ್ದ ಬಿಂದು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ. ಆದರೆ ಇತ್ತ ಪತ್ನಿ ಸತ್ತು ಹೋಗಿದ್ದಾಳೆ ಎಂದು ತಿಳಿದ ಪ್ರಶಾಂತ್ ಆಕೆಯ ಮನೆಯಲ್ಲೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತ ಪತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಿಂದುಳನ್ನು ಸ್ಥಳೀಯರು ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಬಿಂದುವಿಗೆ ಚಿಕಿತ್ಸೆ ಮುಂದುವರಿದಿದೆ. ಹೊಳೆನರಸೀಪುರ ನಗರ ಪೊಲೀಸರು ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.