ಮಲ್ಪೆ: ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ.
ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನದ ಬೇಲೂರಿನಿಂದ ಪ್ರವಾಸಕ್ಕೆ ಬಂದ ಕುಟುಂಬವೊಂದರ ಮೂವರು ನೀರಿಗೆ ಇಳಿದಿದ್ದರು.ಅಲೆಗಳ ಜೊತೆ ಆಟವಾಡುತ್ತಾ ತೀರದಿಂದ ಸಾಕಷ್ಟು ಮುಂದೆ ಹೋಗಿದ್ದರು. ಇದಕ್ಕಿದ್ದಂತೆ ಅಲೆಗಳ ಆರ್ಭಟ ಹೆಚ್ಚಿ, ಈ ಬಗ್ಗೆ ಅರಿವಿಲ್ಲದ ಮೂವರು ಪ್ರವಾಸಿಗರು ನೀರು ಪಾಲಾಗಿದ್ದರು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ತಂದಿದ್ದಾರೆ.
ಮೂವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಗಿರೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇಬ್ಬರನ್ನು ರಕ್ಷಿಸಿಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.