




ಕೋಲ್ಕತ್ತಾ: ಭಂಗಾರ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ನ ಮಾಜಿ ಶಾಸಕ ಸಾಕತ್ ಮೊಲ್ಲಾ ಅವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಂಧನದಿಂದ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಸಾಕತ್ ಮೊಲ್ಲಾ ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಿದ ಕೆಲವೇ ಗಂಟೆಗಳ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ (ಜೂ.5) ರಾತ್ರಿ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಅವರನ್ನು ಬಂಧಿಸಿ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆದಿದೆ ಎಂದು ಎನ್ಐಎ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರ ಮಗಳು, ನನ್ನ ತಂದೆ ಮನೆಯಲ್ಲಿ ಇರಲಿಲ್ಲ. ಅವರು ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಚಿಂಗ್ರಿಘಾಟ್ ಬಳಿ ಅವರು ಅಧಿಕಾರಿಗಳಿಗೆ ಶರಣಾದರು ಎಂದು ಮಾಹಿತಿ ನೀಡಿದ್ದಾರೆ.
ಜೂ.5 ರಂದು ಎನ್ಐಎ ಅಧಿಕಾರಿಗಳು ಅವರ ನಿವಾಸ ಮತ್ತು ದಕ್ಷಿಣ 24 ಪರಗಣ ಜಿಲ್ಲೆಯಾದ್ಯಂತ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದ್ದರು. ಮೌಖಾಲಿ, ಬರುಯಿಪುರ ಮತ್ತು ಸೋನಾರ್ಪುರದಲ್ಲಿನ ಸ್ಥಳಗಳ ಮೇಲೆ ಎನ್ಐಎ ತಂಡಗಳು ದಾಳಿ ನಡೆಸಿದ್ದರಲ್ಲದೇ ಬಾಂಬ್ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳ ಸಾಗಾಟ ಮಾಡಿದ್ದ ವಾಹನದ ಚಾಲಕನನ್ನು ಬಂಧಿಸಿದ್ದರು.
ಮಾರ್ಚ್ 19 ರಂದು ದಕ್ಷಿಣ 24 ಪರಗಣ ಜಿಲ್ಲೆಯ ದಕ್ಷಿಣ ಬಮುನಿಯಾ ಗ್ರಾಮದಲ್ಲಿ ಬಾಂಬ್ಗಳನ್ನು ತಯಾರಿಸುತ್ತಿದ್ದಾಗ ಕಚ್ಚಾ ಬಾಂಬ್ ಸ್ಫೋಟಗೊಂಡಿತ್ತು. ಈ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿ, ಮೂವರು ತೀವ್ರವಾಗಿ ಗಾಯಗೊಂಡಿದ್ದರು ಎಂದು ವರದಿ ಮೂಲಕ ತಿಳಿದುಬಂದಿದೆ.







