ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ 100 ಅಡಿ ಎತ್ತರದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಭಾನುವಾರ ಸಂಜೆ ನಡೆದಿದೆ. ಪರಿಣಾಮ 6 ವರ್ಷದ ಬಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ .
ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಮಿನಿ ಬಸ್ ಮಾಡಿಕೊಂಡು 23 ಜನ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಮಾಣಿಕ್ಯಾಧಾರ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಮಾಣಿಕ್ಯಧಾರ ನೋಡಿಕೊಂಡು ವಾಪಸ್ ಕೆಳಗೆ ಇಳಿಯುವ ಸಂದರ್ಭ ದತ್ತಪೀಠ-ಮಾಣಿಕ್ಯಾಧಾರ ಮಧ್ಯೆ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ 100 ಅಡಿ ಎತ್ತರದಿಂದ ಕೆಳಗೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ತೀವ್ರ ಅಸ್ವಸ್ಥನಾಗಿದ್ದ 6 ವರ್ಷದ ಬಾಲಕ ಮಹಮದ್ ನವಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.