ಜೈಪುರ(ಸೆ. 27) ಸಾವಿರಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳನ್ನ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನೀಡಬೇಕೆಂದು ಒತ್ತಾಯಿಸಿ ಬುಡಕಟ್ಟು ಯುವಕರು ನಡೆಸುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.
ದುಂಗಾರ್ಪುರ್ ಜಿಲ್ಲೆಯಲ್ಲಿ ಸಾವಿರಾರು ಬುಡಕಟ್ಟು ಯುವಕರು ರಾಷ್ಟ್ರೀಯ ಹೆದ್ದಾರಿಯನ್ನ ತಡೆದು ಹಲವು ವಾಹನಗಳು, ಪೆಟ್ರೋಲ್ ಪಂಪ್ಗಳನ್ನ ಧ್ವಂಸ ಮಾಡಿದ್ದಾರೆ. ಈ ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ಧಾರೆ. 10ಕ್ಕೂ ಹೆಚ್ಚು ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಪ್ರತಿಭಟನಾಕಾರರನ್ನ ಚದುರಿಸಲು ಪೊಲೀಸರು ಲಾಠಿಚಾರ್ಜ್ ಮತ್ತು ಟಿಯರ್ ಗ್ಯಾಸ್ ಪ್ರಯೋಗ ಮಾಡಿದರು. ಪೊಲೀಸರ ಗೋಲಿಬಾರ್ನಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ಇದೆ. ಆದರೆ, ಪೊಲೀಸರು ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.
ಸದ್ಯ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸುವುದಾಗಿ ಭರವಸೆ ನೀಡಿರುವ ಮುಖ್ಯಮಂತ್ರಿ ಅಶೋಕ್, ಕಾನೂನು ಪಾಲನೆ ಮಾಡುವಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿದ್ಧಾರೆ. “ದುಂಗಾರ್ಪುರ್ನಲ್ಲಿ ಹಿಂಸಾಚಾರ ನಡೆದಿರುವುದು ದುರದೃಷ್ಟಕರ. ಪ್ರತಿಭಟನೆಗೆ ಸಾಂವಿಧಾನಿಕದತ್ತವಾಗಿರುವ ಹಕ್ಕನ್ನು ಬಳಸಿಕೊಳ್ಳಬಹುದು. ಆದರೆ, ಪ್ರತಿಭಟನೆ ಶಾಂತಿಯುತವಾಗಿರಬೇಕು. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ” ಎಂದು ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ, ಪ್ರತಿಭಟನಾಕಾರರ ಒಂದು ನಿಯೋಗದ ಜೊತೆ ಸಚಿವರು ಮಾತುಕತೆ ನಡೆಸಿದ್ದಾರೆ. ಮೂರು ಗಂಟೆ ಕಾಲ ನಡೆದ ಮಾತುಕತೆಯಲ್ಲಿ ಹಿಂಸಾಚಾರವನ್ನು ಕೈಬಿಡುವಂತೆ ಪ್ರತಿಭಟನಾಕಾರರಿಗೆ ಸರ್ಕಾರ ಮನವಿ ಮಾಡಿದೆ.