


ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ.ತುರುವೇಕೆರೆ ತಾಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ. ಆದರೆ ಸಂಜೆಯಾದರೂ ಕೂಡ ಮನೆಗೆ ಮರಳಿರಲಿಲ್ಲ. ಜೊತೆಗೆ ಪೋಷಕರ ಕಾಲ್ನ್ನು ಕೂಡ ರಿಸೀವ್ ಮಾಡಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ರು. ಈ ವೇಳೆ ಡಿಪ್ಲೋಮಾ ಕಾಲೇಜಿನ ಹಿಂಭಾಗ ಇರುವ ಕಟ್ಟೆಯೊಂದರ ಬಳಿ ಬ್ಯಾಗ್, ಚಪ್ಪಲಿ, ಮೊಬೈಲ್ ಪತ್ತೆಯಾಗಿದೆ. ಜೊತೆಗೆ ಆತ್ಮಹತ್ಯೆಗೂ ಮುನ್ನ ಮೊಬೈಲ್ನಲ್ಲಿ ಸ್ಟೇಟಸ್ ಹಾಕಿದ್ದನ್ನು ಗಮನಿಸಿದ್ದರು. ಕೂಡಲೇ ಪೋಷಕರು ತುರುವೇಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಸಿದಾಗ ನೀರಿನ ಕಟ್ಟೆಯಲ್ಲಿ ವಿದ್ಯಾರ್ಥಿ ಧನುಷ್ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನ ಕಟ್ಟೆಯಿಂದ ಹೊರತೆಗೆದು ತುರುವೇಕೆರೆ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ








