ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ, ಎಂಪಿ ಕುಮಾರಸ್ವಾಮಿ ಹಾಗೂ ಅವರ ಬೆಂಬಲಿಗರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಡಿಕೆಶಿ ಅವರು ಜಯಪ್ರಕಾಶ್ ಹೆಗ್ಡೆ, ಸುಕುಮಾರ್ ಶೆಟ್ಟಿ ಹಾಗೂ ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಜಯಪ್ರಕಾಶ್ ಹೆಗ್ಡೆ ಜನತಾದಳದ ಮೂಲಕ ರಾಜ್ಯದ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದರು. 1994ರಲ್ಲಿ ಬ್ರಹ್ಮಾವರ ಕ್ಷೇತ್ರದಲ್ಲೇ ಮೊದಲ ಬಾರಿ ಜಯಗಳಿಸುವ ಮೂಲಕ ರಾಜ್ಯ ವಿಧಾನಸಭೆಯನ್ನು ಪ್ರವೇಶಿಸಿದ್ದರು. ಬಳಿಕ 2004ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಸತತ 11 ವರ್ಷ ಈ ಕ್ಷೇತ್ರವನ್ನು ಪ್ರತಿನಿಧಿಸಿ ಮೀನುಗಾರಿಕಾ ಸಚಿವರಾಗಿ ಕೂಡ ಸೇವೆ ಸಲ್ಲಿಸಿದ್ದರು.
ಜಯಪ್ರಕಾಶ್ ಹೆಗ್ಡೆ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಲು ಪಕ್ಷ ನಿರ್ಧರಿಸಿದೆ. ಕರಾವಳಿ ಅಭಿವೃದ್ಧಿಯ ಗುರಿ ಸಾಧನೆಗೆ ಕಾಂಗ್ರೆಸ್ ಸೇರುತ್ತಿರುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದರು.
ಈ ಸಂದರ್ಭ ಸಚಿವೆ ಲಕ್ಷೀ ಹೆಬ್ಬಾಳ್ಕರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಂಶುಮಂತ್ ಗೌಡ, ಗೃಹ ಸಚಿವ ಜಿ ಪರಮೇಶ್ವರ್, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಾಸಿರ್ ಅಹಮದ್, ಸಚಿವರು ಹಾಗೂ ಉಡುಪಿ ಜಿಲ್ಲಾ ಮುಖಂಡರಾದ ಪ್ರಸಾದರಾಜ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.