Monday, June 15, 2026
spot_imgspot_img
spot_imgspot_img

ಉಡುಪಿ: ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಬೀರ್ ಬಂಧನ..!

- Advertisement -
- Advertisement -

ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಕಬೀರ್ 2005ರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದ್ದು, 8 ಪ್ರಕರಣಗಳಲ್ಲಿ ನಿರ್ದೋಷಿ ಎಂದು ಬಿಡುಗಡೆಯಾಗಿದ್ದಾನೆ. ಇನ್ನು ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿರುತ್ತಾನೆ. ಎರಡು ಪ್ರಕರಣಗಳು ನ್ಯಾಯಾಂಗ ವಿಚಾರಣೆಯಲ್ಲಿವೆ ಮತ್ತು ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿವೆ.

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಕರ್ನಾಟಕ ಗೂಂಡಾ ಕಾಯಿದೆ (ಕರ್ನಾಟಕ ಅಕ್ರಮ ಮದ್ಯ ಮಾರಾಟಗಾರರು, ಮಾದಕ ವಸ್ತು ಅಪರಾಧಿಗಳು, ಜೂಜುಕೋರರು, ಗೂಂಡಾಗಳು ಇತ್ಯಾದಿಗಳ ಅಪಾಯಕಾರಿ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ) ಅಡಿಯಲ್ಲಿ ಕಬೀರ್ ವಿರುದ್ಧ ತಡೆಗಟ್ಟುವ ಬಂಧನ ಆದೇಶವನ್ನು ಹೊರಡಿಸಿದ್ದರು.

ಉಡುಪಿ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆರೋಪಿಯು ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ.

- Advertisement -

Related news

error: Content is protected !!