

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಅಡ್ಡ ಬಂದ ಬೈಕ್ಗೆ ಡಿಕ್ಕಿಯಾದುದನ್ನು ತಪ್ಪಿಸಲು ಹೋಗಿ ಲಾರಿಯೊಂದು ಮಗುಚಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆಯ ಆಶೀರ್ವಾದ ಸಮೀಪ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ಸಾಗಿಸುತ್ತಿದ್ದ ಲಾರಿಗೆ ಬೈಕ್ಕೊಂದು ಅಡ್ಡ ಬಂದಿದೆ. ಅಪಘಾತ ತಪ್ಪಿಸಲು ಲಾರಿ ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಲಾರಿ ಪಲ್ಟಿಯಾಗಿದೆ.
ದುರ್ಘಟನೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಲಾರಿ ಚಾಲಕ, ನಾಲ್ಕು ಮಂದಿ ಕಾರ್ಮಿಕರು ಹಾಗೂ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಅಂಬಲಪಾಡಿ ಜಂಕ್ಷನ್ ಬಳಿಯ ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ದುರ್ಘಟನೆ ಸಂಭವಿಸುವ ಮುಂಚೆ ಅದೇ ಸ್ಥಳದಲ್ಲಿ ಬೈಕ್ ಸವಾರನೊಬ್ಬ ತನ್ನ ಬೈಕ್ ನಿಲ್ಲಿಸಿ ಪಕ್ಕದಲ್ಲಿ ನಿಂತಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾನೆ. ಆದರೆ ಈತನ ಬೈಕ್ ಮಾತ್ರ ಲಾರಿಯ ಅಡಿಗೆ ಬಿದ್ದು ನಜ್ಜುಗುಜ್ಜಾಗಿದೆ. ಪ್ರಕರಣದ ಬಗ್ಗೆ ಉಡುಪಿ ಸಂಚಾರಿ ಠಾಣೆಗೆ ಮಾಹಿತಿ ನೀಡಲಾಗಿದೆ.








