



ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ.
ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರ ಪೃಥ್ವಿರಾಜ್ ಶೆಟ್ಟಿ (12) ಕುಸಿದು ಬಿದ್ದು ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.
7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ ಅಕ್ಕ ವರ್ಷದ ಹಿಂದೆಯಷ್ಟೇ ಹೃದಯಾಘಾತದಿಂದ ಮೃತಪಟ್ಟಿದ್ದಳು, ಅಕ್ಕನ ಸಾವಿನ ನೋವಲ್ಲಿರುವ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಉಂಟು ಮಾಡಿದೆ. ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ಪೋಷಕರಿಗೆ ತಿಳಿಸಿದ್ದಾರೆ. ಹೃದಯಾಘಾತದಿಂದ ಬಾಲಕ ಪೃಥ್ವಿರಾಜ್ ಮೃತಪಟ್ಟಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಪೃಥ್ವಿರಾಜ್ ಸಾವಿಗೆ ಕಾರಣ ತಿಳಿಯಲಿದೆ.
ಅರುಣ್ ಕುಮಾರ್ ಶೆಟ್ಟಿ ಹಾಗೂ ಭಾರತಿ ಶೆಟ್ಟಿ ದಂಪತಿಗೆ ಓರ್ವ ಪುತ್ರಿ ಹಾಗೂ ಪುತ್ರ ಇದ್ದು, ಮಗಳು ಕಳೆದ ವರ್ಷ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಅವರ ಮನೆಯಲ್ಲಿ ಸಂಭವಿಸಿದ ಎರಡನೇ ದುರಂತ. ಕಳೆದ ವರ್ಷ ಅ.27 ರಂದು 8ನೇ ತರಗತಿಯಲ್ಲಿ ಓದುತ್ತಿದ್ದ ಪುತ್ರಿ ಅನುಶ್ರೀ (14) ಮನೆಯಲ್ಲಿ ಓದುತ್ತಿರುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದರು. ಇದೀಗ ಇದ್ದ ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಂಗಾಲಾಗಿದ್ದಾರೆ.