ಉಳ್ಳಾಲ: ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ಬೋಟೊಂದು ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ನ ಮೀನುಗಾರರು ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್ಗೆ ಹಾನಿಯಾಗಿದೆ.
ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು,ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್ನ ಬ್ರೊಫೈಲರ್ರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೈಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ.
ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ದುರ್ಗಾಲಕ್ಷ್ಮೀ ಮತ್ತು ಶ್ರೀ ಗೌರಿ ಬೋಟ್ನ ಮೀನುಗಾರರು ರಕ್ಷಿಸಿ, ಮುಳುಗುತ್ತಿದ್ದ ಬೋಟನ್ನು ಸಮುದ್ರ ಕಿನಾರೆಗೆ ಎಳೆದುಕೊಂಡು ಹೋಗಲು ಹಗ್ಗ ಕಟ್ಟಿ ಸ್ವಲ್ಪ ದೂರ ಎಳೆದುಕೊಂಡು ಹೋಗಿದ್ದು ಈ ಸಂದರ್ಭದಲ್ಲಿ ಹಗ್ಗ ತುಂಡಾಯಿತು. ಬಳಿಕ ಅಶ್ವಿನ್ ಕೋಟ್ಯಾನ್ ಮಾಲಕತ್ವದ ಜೈ ಮಾರುತಿ ಸ್ಪೀಡ್ ಬೋಟ್ ಮೂಲಕ ಹಳೆ ಬಂದರು ದಕ್ಕೆಗೆ ಎಳೆದುಕೊಂಡು ಹೋಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.