





ಉಪ್ಪಿನಂಗಡಿ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ 16 ಜಾನುವಾರುಗಳನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜೂನ್ 17ರ ಬೆಳಿಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾ&ಸು) ಸುತೇಶ್ ಕೆ.ಪಿ. ಅವರು ಸಿಬ್ಬಂದಿಯೊಂದಿಗೆ ಉಪ್ಪಿನಂಗಡಿ ಸಮೀಪದ ಆನೆಬೈಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎ-14-ಎ-7511 ಸಂಖ್ಯೆಯ ಈಚರ್ ಲಾರಿಯನ್ನು ಪರಿಶೀಲಿಸಿದರು.
ಪರಿಶೀಲನೆಯ ವೇಳೆ ಲಾರಿಯಲ್ಲಿ 16 ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಯಿತು. ಲಾರಿಯಲ್ಲಿದ್ದ ಕಡೂರು ನಿವಾಸಿ ಪರ್ದಿನ್ ಖಾನ್ (24) ಹಾಗೂ ಹಾಸನ ಜಿಲ್ಲೆಯ ಹೊಳೆನರಸಿಪುರ ನಿವಾಸಿ ಜಾವೀದ್ ಪಾಷಾ (34) ಅವರನ್ನು ಜಾನುವಾರು ಸಾಗಾಟದ ಕುರಿತು ವಿಚಾರಿಸಿದಾಗ, ಯಾವುದೇ ದಾಖಲಾತಿಗಳನ್ನು ಹೊಂದಿರದೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿಯೊಂದಿಗೆ ಜಾನುವಾರುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 91/2026ರಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 5, 6, 12, ಪ್ರಾಣಿ ಹಿಂಸೆ ತಡೆ ಕಾಯ್ದೆಯ ಕಲಂ 11(ಡಿ) ಹಾಗೂ ಬಿಎನ್ಎಸ್ ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.








