ಡೆಹ್ರಾಡೂನ್ : ಉತ್ತರಾಖಂಡ್ ನೂತನ ಮುಖ್ಯಮಂತ್ರಿಯಾಗಿ ಸಂಸದ ತೀರಥ್ ಸಿಂಗ್ ರಾವತ್ ಆಯ್ಕೆಯಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಬಳಿಕ ಇಂದು ಬೆಳಗ್ಗೆ ನಡೆದ ಶಾಂಸಕಾಂಗ ಸಭೆಯಲ್ಲಿ ತೀರಥ್ ಸಿಂಗ್ ರಾವತ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.

ಅಂದ್ಹಾಗೆ ನಿನ್ನೆ ದೆಹಲಿಯಲ್ಲಿ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನ ತ್ರಿವೇಂದ್ರ ಸಿಂಗ್ ರಾವತ್ ಭೇಟಿಯಾಗಿದ್ದರು. ರಾವತ್ ಅವರ ಕಾರ್ಯವೈಖರಿ ಬಗ್ಗೆ ಉತ್ತರಾಖಂಡ್ನ ಬಿಜೆಪಿ ಶಾಸಕರು ಮತ್ತು ಸಂಸದರು ಅಸಮಾಧಾನಗೊಂಡಿದ್ದಾರೆ. ಸಿಎಂ ಬದಲಾವಣೆ ಮಾಡಬೇಕು. ತ್ರಿವೇಂದ್ರ ಸಿಂಗ್ ರಾವತ್ ನೇತೃತ್ವದಲ್ಲಿ ಮುಂದಿನ ವರ್ಷ ಚುನಾವಣೆಗೆ ಹೋದ್ರೆ ಬಿಜೆಪಿಗೆ ಹಿನ್ನಡೆಯಾಗಲಿದೆ ಅನ್ನೋ ಮಾತು ಪಕ್ಷದ ಒಳಗೇ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ರಾಷ್ಟ್ರೀಯ ನಾಯಕರನ್ನ ಭೇಟಿಯಾಗಿದ್ದ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.

ಡೆಹ್ರಾಡೂನ್ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾವತ್ ಅವರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯದ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ.ಉತ್ತರಾಖಂಡ ಸಚಿವ ಧನ್ ಸಿಂಗ್ ರಾವತ್, ಕೇಂದ್ರ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಹೆಸರು ಮುಖ್ಯಮಂತ್ರಿ ಸ್ಥಾನಕ್ಕೆ ಕೇಳಿ ಬಂದಿತ್ತು. ಆದರೆ ಬಿಜೆಪಿ 56ರ ಹರೆಯದ ಗಡ್ವಾಲ್ನ ಸಂಸದ ತಿರತ್ ಸಿಂಗ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ. ಇಂದು ಸಂಜೆ 4 ಗಂಟೆಗೆ ರಾವತ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
