



ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ವಿಶೇಷ ವೀಕ್ಷಕ ಸುಬ್ರತಾ ಗುಪ್ತಾ ಅವರು ಈ ನಿರ್ಬಂಧವನ್ನು ದೃಢಪಡಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಲ್ಲಿಯೂ ಯಾವುದೇ ವಿಜಯೋತ್ಸವ ಆಚರಣೆಳಿಗೆ ಅವಕಾಶ ನೀಡಲಾಗುವುದಿಲ್ಲ. ಸೂಕ್ಷ್ಮ ಎಣಿಕೆ ಪ್ರಕ್ರಿಯೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳ ಮತಗಟ್ಟೆ ಏಜೆಂಟ್ಗಳು ಸಮಯಕ್ಕೆ ಸರಿಯಾಗಿ ಎಣಿಕೆ ಕೇಂದ್ರಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಬಂದಿವೆ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಕೆಲವು ಸಿಸಿಟಿವಿ ಕ್ಯಾಮೆರಾಗಳು 5-10 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತಿರಲಿಲ್ಲ. ಈಗ ಸಮಸ್ಯೆ ಪರಿಹರಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.








