Saturday, June 13, 2026
spot_imgspot_img
spot_imgspot_img

ಕೇರಳದಲ್ಲಿ ಹೊಸ ವೈರಸ್ ಆತಂಕ – 4 ವರ್ಷದ ಮಗು ಬಲಿ, ಇಬ್ಬರಿಗೆ ಸೋಂಕು ದೃಢ

- Advertisement -
- Advertisement -

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ. ಸೋಂಕಿನಿಂದ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದು, ಇನ್ನೂ ಕೆಲವು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ.

ಮಾಹಿತಿಯ ಪ್ರಕಾರ, ಕೋಝಿಕ್ಕೋಡ್ ಜಿಲ್ಲೆಯ ನಾಲ್ಕು ವರ್ಷದ ನೀಲಾ ಎಂಬ ಬಾಲಕಿ ಶಿಗೆಲ್ಲಾ ಸೋಂಕಿನಿಂದ ಮೃತಪಟ್ಟಿದ್ದಾಳೆ. ಒಟ್ಟು ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, 10 ವರ್ಷದ ಮಗುವನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನೊಂದು 2 ವರ್ಷದ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸೋಂಕಿನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ, ಪರಿಸ್ಥಿತಿಯ ಪರಿಶೀಲನೆಗಾಗಿ ಉನ್ನತ ಮಟ್ಟದ ಸಭೆ ನಡೆಸಲು ನಿರ್ಧರಿಸಿದೆ. ಸೋಂಕು ಮತ್ತಷ್ಟು ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಂಕಿತರ ಸಂಪರ್ಕಕ್ಕೆ ಬಂದವರ ಮೇಲೂ ಆರೋಗ್ಯ ಇಲಾಖೆ ನಿಗಾ ವಹಿಸಿದೆ.

ಶಿಗೆಲ್ಲೋಸಿಸ್ ಅಥವಾ ಶಿಗೆಲ್ಲಾ ಸೋಂಕು ಜೀರ್ಣಾಂಗ ವ್ಯವಸ್ಥೆ, ವಿಶೇಷವಾಗಿ ಕರುಳಿನ ಮೇಲೆ ಪರಿಣಾಮ ಬೀರುವ ಬ್ಯಾಕ್ಟೀರಿಯಾ ಸೋಂಕಾಗಿದೆ. ಶಿಗೆಲ್ಲಾ ಬ್ಯಾಕ್ಟೀರಿಯಾದಿಂದ ಉಂಟಾಗುವ ಈ ರೋಗವು ಸಾಮಾನ್ಯವಾಗಿ ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುತ್ತದೆ. ತೀವ್ರ ಅತಿಸಾರ, ಹೊಟ್ಟೆ ನೋವು, ಜ್ವರ ಮತ್ತು ವಾಂತಿ ಇದರ ಪ್ರಮುಖ ಲಕ್ಷಣಗಳಾಗಿವೆ. ವೈದ್ಯರ ಪ್ರಕಾರ, ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇರುವುದರಿಂದ ಮಕ್ಕಳು, ವೃದ್ಧರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎನ್ನಲಾಗಿದೆ.

ಕೇರಳ ಆರೋಗ್ಯ ಸಚಿವ ಕೆ. ಮುರಳೀಧರನ್ ಅವರು ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಲು ವಯನಾಡ್ ಜಿಲ್ಲೆಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಪ್ರಸ್ತುತ ಸುಲ್ತಾನ್ ಬತ್ತೇರಿ ತಾಲೂಕು ಆಸ್ಪತ್ರೆಯಲ್ಲಿ 25 ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದು, ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಸಲಹೆಗಳು :

  • ಕುದಿಸಿದ ಅಥವಾ ಶುದ್ಧೀಕರಿಸಿದ ನೀರನ್ನು ಮಾತ್ರ ಕುಡಿಯಿರಿ.
  • ಆಹಾರ ಸೇವಿಸುವ ಮೊದಲು ಮತ್ತು ಶೌಚಾಲಯ ಬಳಕೆಯ ನಂತರ ಕೈಗಳನ್ನು ಚೆನ್ನಾಗಿ ತೊಳೆಯಿರಿ.
  • ಹೊರಗಿನ ಅಸ್ವಚ್ಛ ಆಹಾರ ಸೇವನೆ ತಪ್ಪಿಸಿ.
  • ಮಕ್ಕಳ ಆರೋಗ್ಯದಲ್ಲಿ ಅತಿಸಾರ, ಜ್ವರ ಅಥವಾ ವಾಂತಿ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ತಿಳಿಸಿದ್ದಾರೆ.
- Advertisement -

Related news

error: Content is protected !!