ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ ಯತೀಶ್ ಎನ್ ಭೇಟಿ


ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಮಾಲಕರೋರ್ವರ ಮನೆಗೆ ನಕಲಿ ಇಡಿ ಅಧಿಕಾರಿಗಳೆಂದು ನಂಬಿಸಿ ದಾಳಿ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜ.03ರಂದು ರಾತ್ರಿ 8:10ರ ಸುಮಾರಿಗೆ ತಮಿಳುನಾಡಿನ ನೋಂದಣೆ ಹೊಂದಿರುವ ಕಾರಿನಲ್ಲಿ 6 ಜನ ಅಪರಿಚಿತ ವ್ಯಕ್ತಿಗಳು ಬಂದು, ತಮ್ಮನ್ನು ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ನಿಮ್ಮ ಮನೆಯನ್ನು ಪರಿಶೀಲನೆ ನಡೆಸಲು ಆದೇಶವಾಗಿರುತ್ತದೆ ಎಂಬುದಾಗಿ ತಿಳಿಸಿ ಮನೆಗೆ ಪ್ರವೇಶಿಸಿ, ಮನೆ ಮಂದಿಯ 5 ಮೊಬೈಲ್ ಪೊನ್ಗಳನ್ನು ಪಡೆದುಕೊಂಡು ಬಳಿಕ ಮನೆಯನ್ನು ಹುಡುಕಾಡಿರುತ್ತಾರೆ.
ಈ ವೇಳೆ ದೂರುದಾರ ಇಕ್ಬಾಲ್ರವರ ತಂದೆಯ ಕೊಣೆಯ ಕಪಾಟಿನಲ್ಲಿ ವ್ಯವಹಾರಕ್ಕಾಗಿ ಇಟ್ಟಿದ್ದ ಸುಮಾರು 25 ರಿಂದ 30 ಲಕ್ಷ ಹಣವನ್ನು ಪಡೆದುಕೊಂಡು, “ಇಷ್ಟು ಹಣವನ್ನು ನಿಮ್ಮಲ್ಲಿ ಇಟ್ಟುಕೊಳ್ಳಲು ಅವಕಾಶವಿಲ್ಲ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಮತ್ತು ಕಸ್ಟಡಿ ತೆಗೆದುಕೊಳ್ಳುತ್ತೇನೆʼʼ ಎಂಬುದಾಗಿ ಹೇಳಿರುತ್ತಾರೆ. ರಾತ್ರಿ ಸುಮಾರು 10.30 ಗಂಟೆಗೆ ಆರೋಪಿಗಳು ಮನೆಯಿಂದ ಹೊರಬಂದು ತಾವುಗಳು ಪಡೆದುಕೊಂಡಿರುವ ಹಣಕ್ಕೆ ಸೂಕ್ತ ದಾಖಲೆಗಳನ್ನು ನೀಡಿ, ಈ ಹಣವನ್ನು ಬೆಂಗಳೂರಿನಲ್ಲಿರುವ ಆಫೀಸಿನಿಂದ ಪಡೆದುಕೊಳ್ಳುವಂತೆ ತಿಳಿಸಿ ಹೋಗಿರುತ್ತಾರೆ.

ಈ ಬಗ್ಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದಾಗ ಅಪರಿಚಿತ ವ್ಯಕ್ತಿಗಳು ಇ.ಡಿ ಅಧಿಕಾರಿಗಳಂತೆ ನಟಿಸಿ ಮನೆಯಿಂದ ಸುಮಾರು 25 ರಿಂದ 30 ಲಕ್ಷ ಹಣವನ್ನು ಮತ್ತು 5 ಮೊಬೈಲ್ ಪೊನ್ ಗಳನ್ನು ಪಡೆದುಕೊಂಡು ವಂಚನೆ ಮಾಡಿರುವುದು ತಿಳಿದು ಬಂದಿರುತ್ತದೆ. ಈ ಬಗ್ಗೆ ಮಹಮ್ಮದ್ ಇಕ್ಬಾಲ್ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 02/2025 ಕಲಂ: 319(2), 318(4) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ ಯತೀಶ್ ಎನ್, ಐ.ಪಿ.ಎಸ್ ರವರು ಭೇಟಿ ನೀಡಿ ಪರಿಶೀಲಿಸಿ, ಆರೋಪಿಗಳ ಪತ್ತೆಗಾಗಿ ಸೂಕ್ತ ಸಲಹೆ/ಸೂಚನೆ ನೀಡಿದರು.