ವಿಟ್ಲ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸಾಬೀತಾಗಿದ್ದು, ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-1ನ್ಯಾಯಾಲಯ ತೀರ್ಪು ನೀಡಿದೆ.
ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಶಿಕ್ಷೆಗೊಳಗಾದ ಅಪರಾಧಿ.
ಏನಿದು ಪ್ರಕರಣ..?
2019ರ ಆ.30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್ನಲ್ಲಿ ಪ್ರಯಾಣಿಸಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯು ಹಿಂದಿನಿಂದ ಬಂದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿ ಬೊಬ್ಬೆ ಹೊಡೆದಾಗ ವಿಚಾರಿಸಿದ ವ್ಯಕ್ತಿಗೆ ಆರೋಪಿಯು ಬೆದರಿಕೆಯೊಡ್ಡಿ, ಹಲ್ಲೆ ನಡೆಸಿದ್ದ ಎಂದೂ ಆರೋಪ ವ್ಯಕ್ತವಾಗಿತ್ತು. ಬಾಲಕಿಗೆ ಲೈಂಗಿಕ ಕಿರುಕುಳ ಘಟನೆ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆಗಿನ ಎಸ್.ಐ.ಯಲ್ಲಪ್ಪ ಎಸ್. ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುಳಾ ಇಟ್ಟಿ ಅವರು ಆರೋಪಿಗೆ ಪೊಕ್ಸೊ ಕಲಂ 8ರಡಿ 3 ವರ್ಷ ಸಜೆ, 10,000 ರೂ.ದಂಡ ವಿಧಿಸಿದ್ದಾರೆ. ದಂಡ ತರಲು ತಪ್ಪಿದರೆ 3 ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ಆದೇಶಿಸಲಾಗಿದೆ. ಐಪಿಸಿ ಕಲಂ 354ರಡಿ 1 ವರ್ಷ ಸಜೆ, 5,000 ರೂ.ದಂಡ ದಂಡ ಪಾವತಿಸದಿದ್ದರೆ ಒಂದು ತಿಂಗಳು ಹೆಚ್ಚುವರಿ ಸಜೆ.ಐಪಿಸಿ ಕಲಂ 506ರ ಅಡಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.ಅಲ್ಲದೆ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ.ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.