ಪುತ್ತೂರು: ಜನಸಂಖ್ಯೆ ಹೆಚ್ಚಾದಂತೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದರಿಂದ ಅಪಘಾತಗಳು ಕೂಡ ಹೆಚ್ಚಾಗಿವೆ. ಆದ್ದರಿಂದ ಸಂಚಾರ ನಿಯಮಗಳ ಕಡ್ಡಾಯ ಪಾಲನೆಯಾಗಬೇಕು. ಸಂಚಾರ ನಿಯಮಗಳು ನಮ್ಮ ಸಂಸ್ಕೃತಿ ಮತ್ತು ಜೀವನ ವಿಧಾನವಾಗಬೇಕು ಎಂದು ಪುತ್ತೂರು ಸಂಚಾರಿ ಠಾಣೆ ಪೊಲೀಸ್ ಉಪನಿರಿಕ್ಷಕರು ರಾಮ ನಾಯಕ್ ಹೇಳಿದರು.
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಭಾರತದಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ಸಂಚಾರ ನಿಯಮಗಳ ಕಡ್ಡಾಯ ಪಾಲನೆ, ತಂತ್ರಜ್ಞಾನಗಳ ಅಳವಡಿಕೆ ಮೂಲಕ ಕಡಿಮೆ ಮಾಡಬಹುದು. ಸಂಚಾರ ನಿಯಮ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಚಾಲನೆ ವೇಳೆ ಮೊಬೈಲ್ ಬಳಕೆ ಮುಂತಾದ ಪ್ರವೃತ್ತಿಗಳನ್ನು ಬಿಡಬೇಕು. ಇವುಗಳು ಅಪಘಾತಕ್ಕೆ ಕಾರಣವಾಗುತ್ತವೆ ಎಂದು ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸಬೇಕು.ಬೆಳೆಯುವ ಸಿರಿ ಮೊಳಕೆಯಲ್ಲೇ ಎಂಬ ಗಾದೆಯಂತೆ ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡಿದರೆ ಭವಿಷ್ಯದಲ್ಲಿ ಅವರು ಸಂಚಾರ ನಿಯಮ ಪಾಲಿಸುವವರಾಗುತ್ತಾರೆ.
ಮಾತ್ರವಲ್ಲ ಅವರು ತಮ್ಮ ಪೋಷಕರಿಗೂ ತಿಳಿಹೇಳುತ್ತಾರೆ. ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ವರ್ಷ ಪೂರ್ತಿ ನಡೆಯಬೇಕು. ಇದರಿಂದ ಮುಂದಿನ ದಿನಗಳಲ್ಲಿ ಅಪಘಾತ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಸಂಚಾರ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ. ವಾಹನ ಚಲಾಯಿಸುವವನು ಅವರ ಜೀವ ಮಾತ್ರವಲ್ಲ ಇತರರ ಜೀವವನ್ನೂ ರಕ್ಷಿಸಬೇಕಾಗಿದೆ. ಆದ್ದರಿಂದ ಸಂಚಾರ ನಿಯಮ ಪಾಲನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪುತ್ತೂರು ಸಂಚಾರಿ ಠಾಣೆ ಮುಖ್ಯ ಆರಕ್ಷಕರಾದ ಪ್ರಶಾಂತ್, ರಾಧಾಕೃಷ್ಣ,ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಉಷಾ, ಉಪನ್ಯಾಸಕ ಜಯಗೋವಿಂದ ಶರ್ಮಾ ಉಪಸ್ಥಿತರಿದ್ದರು. ಉಪನ್ಯಾಸಕಿ ಮೋನಿಷಾ ಸ್ವಾಗತಿಸಿ ದೇವಿಪ್ರಸಾದ್ ವಂದಿಸಿದರು.