ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸತತ ಏಳನೇ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್ಗೆ ಪ್ರವೇಶಿಸಿದೆ.
ಏಕದಿನ ವಿಶ್ವಕಪ್ನ 33ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ಹಂಗಾಮಿ ನಾಯಕ ಕುಶಾಲ್ ಮೆಂಡಿಸ್ ಬೌಲಿಂಗ್ ಆಯ್ದುಕೊಂಡರು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 357 ರನ್ ಕಲೆಹಾಕಿತು. ತಂಡದ ಪರ ವಿರಾಟ್ ಕೊಹ್ಲಿ 88, ಶುಭ್ಮನ್ ಗಿಲ್ 92 ಮತ್ತು ಶ್ರೇಯಸ್ ಅಯ್ಯರ್ 82 ರನ್ಗಳ ಶತಕ ವಂಚಿತ ಇನ್ನಿಂಗ್ಸ್ ಆಡಿದರು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಕೇವಲ 19.4 ಓವರ್ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 55 ರನ್ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರೆ, ಇವರಲ್ಲದೆ ಮೊಹಮ್ಮದ್ ಸಿರಾಜ್ ಮೂರು, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.
ಈ ಮೂಲಕ 302 ರನ್ಗಳ ಬೃಹತ್ ಅಂತರದ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ 2023ರ ಸೆಮಿಫೈನಲ್ಗೆ ಪ್ರವೇಶಿಸಿದೆ.