ಬಾಲ್ಯ ಸ್ನೇಹಿತೆಯ ಜೊತೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದ ಯುವತಿಯೋರ್ವಳು ಆಯ ತಪ್ಪಿ ಸಮುದ್ರಕ್ಕೆ ಬಿದ್ದು,ಸಮುದ್ರಪಾಲಾದ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿರುವ ಕಾವೇರಿ(20)ಮೃತ ಪಟ್ಟ ಯುವತಿ.
ಕಾವೇರಿ ಪೋಷಕರು ಕೂಲಿ ಕೆಲಸಗಾರರಾಗಿದ್ದು ಮಂಗಳೂರಿನ ಉರ್ವ ಸ್ಟೋರಲ್ಲಿ ಕಳೆದ ಅನೇಕ ವರುಷಗಳಿಂದ ನೆಲೆಸಿದ್ದು ತಮ್ಮ ಏಕೈಕ ಮಗಳನ್ನ ಕಷ್ಟ ಪಟ್ಟು ಮಂಗಳೂರು ನಗರದ ಸ್ವಸ್ಥಿಕ್ ಕಾಲೇಜಲ್ಲಿ ಬಿಕಾಂ ಓದಿಸುತ್ತಿದ್ದರು. ಪ್ರತಿಭಾನ್ವಿತೆಯಾಗಿದ್ದ ಕಾವೇರಿ ಬಿಕಾಂ ವ್ಯಾಸಂಗದ ಜೊತೆಗೆ ಸಿಎ ಕೂಡ ಅಧ್ಯಯನ ನಡೆಸುತ್ತಿದ್ದಳು.
ಮೃತ ಕಾವೇರಿ ಜೊತೆ ಬಂದಿದ್ದ ಬಾಲ್ಯ ಸ್ನೇಹಿತೆ ಕಾವೇರಿಯೂ ಕೂಡ ಮಂಗಳೂರು ನಗರದ ಕಾಲೇಜೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ.
ನಿನ್ನೆ ಮೃತ ಯುವತಿ ಕಾವೇರಿಯ ಹುಟ್ಟುಹಬ್ಬದ ಕಾರಣ ಬಾಲ್ಯ ಸ್ನೇಹಿತೆ ಕಾವೇರಿಯೊಂದಿಗೆ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ವಿಹಾರಕ್ಕೆಂದು ಸಮುದ್ರ ತೀರದ ರುದ್ರ ಪಾದೆಯಲ್ಲಿ ವಿಹರಿಸುತ್ತಿದ್ದ ವೇಳೆ ಕಾವೇರಿ ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾಳೆ. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಈಜು ರಕ್ಷಕ ಸಿಬ್ಬಂದಿ ಮೋಹನ್ ಚಂದ್ರ, ಸ್ಥಳೀಯ ಮೀನುಗಾರರಾದ ಯೋಗೀಶ್ ,ಪ್ರವೀಣ್ ,ಸೋಮೇಶ್ವರ ದೇವಸ್ಥಾನದ ಸಿಬ್ಬಂದಿ ವಿನಾಯಕ್ ಮತ್ತು ಸ್ಥಳೀಯರು ಸೇರಿ ಸಮುದ್ರದಲ್ಲಿ ಈಜಾಡಿ ಕಾವೇರಿಯನ್ನ ದಡಕ್ಕೆ ಎಳೆ ತಂದರೂ ಅಷ್ಟರಲ್ಲಿ ಕಾವೇರಿಯ ಪ್ರಾಣ ಹೋಗಿತ್ತು.
ಉಳ್ಳಾಲ ಪೊಲೀಸರುವ ಘಟನಾ ಸ್ಥಳಕ್ಕಾಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.