ಬೆಂಗಳೂರು: ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರಿಗೆ ಎಂಎಲ್ಸಿಗಳಾದ ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ ದೂರು ನೀಡಿದ್ದಾರೆ.

ಭರತನಗರಿ ಎಂಬ ಕಾದಂಬರಿಯಲ್ಲಿ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಈ ಕುರಿತು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ 2016ರಲ್ಲಿ ವಿಪಕ್ಷನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬರಗೂರು ರಾಮಚಂದ್ರಪ್ಪ ಅಕಾಡೆಮಿ ಅಧ್ಯಕ್ಷರಾಗಿದ್ದರು.

ಆಗ ರಾಮಚಂದ್ರಪ್ಪ ಭರತನಗರಿ ಎಂಬ ಕಾದಂಬರಿ ಬರೆದಿದ್ದಾರೆ. ಅದರಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನವಾಗಿ ಬರೆದಿದ್ದಾರೆ. ಭಾರತವನ್ನ ಜಡ ಅಂದಿದ್ದಾರೆ. ಅತ್ಯಂತ ಕೆಟ್ಟ ಶಬ್ಧಗಳನ್ನು ಬರೆದಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ಅಪಮಾನವಾದಾಗ ಸಹಿಸಲು ಸಾಧ್ಯವಿಲ್ಲ. ಇದು ಅತ್ಯಂತ ಅವಹೇಳನ ಹಾಗೂ ತಲೆ ತಗ್ಗಿಸುವಂತ ವಿಚಾರ ಎಂದರು.

ಹೇಳಿಕೇಳಿ ಸಿದ್ದರಾಮಯ್ಯನವರು ಅತಿಸೂಕ್ಷ್ಮ. ಅಂದು ಯಾಕೆ ಕ್ರಮ ಕೈಗೊಂಡಿಲ್ಲ, ಅಥವಾ ಹೋಗಲಿ ಬಿಡಿ ಅಂತಾ ಸುಮ್ಮನಾದರಾ? ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದೇವೆ. ಬರಗೂರು ರಾಮಚಂದ್ರಪ್ಪನವರ ಕಾದಂಬರಿ ಬ್ಯಾನ್ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.









