ಬೆಂಗಳೂರು(ಅ.30): ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ. ಇದೇ ರೀತಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ಸಿಬ್ಬಂದಿ (ಪೇದೆ ದರ್ಜೆಯಿಂದ ಪೊಲೀಸ್ ಅಧೀಕ್ಷಕ ವೃಂದ) ರಾಜ್ಯ ಸರ್ಕಾರದ ಕಚೇರಿಗಳಿಗೆ ಭೇಟಿ ನೀಡುವಾಗ ಹಾಗೂ ಪ್ರಯಾಣದ ಸಂದರ್ಭದಲ್ಲಿ ಭದ್ರತೆ ಕಲ್ಪಿಸಬೇಕಾಗುತ್ತದೆ. ಹೀಗಾಗಿ ಅವರನ್ನು ಗುರುತಿಸುವ ನಿಟ್ಟಿನಲ್ಲಿ ಗುರುತಿನ ಚೀಟಿ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ನಿವೃತ್ತಿ ಹೊಂದುವ ದಿನದಂದೆ ಕಡ್ಡಾಯವಾಗಿ ಗುರುತಿನ ಚೀಟಿ ವಿತರಿಸಬೇಕು. ಎಸ್ಪಿ ದರ್ಜೆಯ ಅಧಿಕಾರಿಗಳು ಸಹಿ ಮಾಡಬೇಕು. ಭಾವಚಿತ್ರ ಇರುವ ಗುರುತಿನ ಚೀಟಿ ಮೆಲೆ ಕಡ್ಡಾಯವಾಗಿ ಕ್ರಮ ಸಂಖ್ಯೆ ಬರೆದು ವಿತರಿಸಿರುವ ಬಗ್ಗೆ ಪ್ರತ್ಯೇಕ ರಿಜಿಸ್ಟರ್ ಪುಸ್ತಕದಲ್ಲಿ ನಮೂದಿಸಬೇಕು. ಈ ಎಲ್ಲ ಮಾಹಿತಿಯನ್ನು ಘಟಕಾಧಿಕಾರಿಗಳ ಮುಖ್ಯಸ್ಥರು ಪರಿಶೀಲಿಸಿಕೊಳ್ಳಬೇಕು. ನಿಗದಿತ ಅವಧಿಯಲ್ಲಿ ಗುರುತಿನ ಚೀಟಿ ಒದಗಿಸದಿರುವ ಬಗ್ಗೆ ದೂರುಗಳು ಕೇಳಿಬಂದರೆ ಘಟಕಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.