ವಿಟ್ಲ: ಕೇರಳ ರಾಜ್ಯದಲ್ಲಿ ದಿನೇದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕೇರಳ – ಕರ್ನಾಟಕ ಗಡಿ ಭಾಗವಾದ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ ಕರ್ನಾಟಕ ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಭೇಟಿ ನೀಡಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಅವರು ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ಕೇರಳದಿಂದ ಆಗಮಿಸುವ ಸಾರ್ವಜನಿಕರಿಗೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟೆಕಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕೇರಳದಿಂದ ರೈಲು ಮಾರ್ಗವಾಗಿ ಬರುವವರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಮಂಗಳೂರಿನ ಪುರಭವನದಲ್ಲಿ ಪರೀಕ್ಷಾ ಕೇಂದ್ರ ತೆರೆದಿರುವುದಾಗಿ ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು.
ಕಾಸರಗೋಡು ಡಿಸಿ, ಎಸ್ಪಿ ಜತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲವಿಲ್ಲ ಎಂದು ಅವರು ಹೇಳಿದರು. ಗಡಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಸೇರಿದಂತೆ ತಪಾಸಣೆ ಬಗ್ಗೆ ಅವರು ಈ ಸಂದರ್ಭ ಮಾಹಿತಿಯನ್ನು ಪಡೆದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ, ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.